ಕಾರ್ಕಳ: ಬಾವಿಯ ಮಣ್ಣು ತೆಗೆಯುವ ವೇಳೆ ಅಪಾಯಕ್ಕೆ ಸಿಲುಕಿದ್ದ ಮೂವರು ಕಾರ್ಮಿಕರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ತಾಲೂಕಿನ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ.
ರಾಜೇಶ್ (42), ಪವನ್ (29) ಹಾಗೂ ಗೋಪಾಲ್ ನಾಯ್ಕ (52) ಎಂಬವರು ಬಾವಿಯ ಮಣ್ಣು ತೆಗೆಯುವ ಕೆಲಸಕ್ಕಾಗಿ ಬಾವಿಗೆ ಇಳಿದಿದ್ದರು. ಈ ವೇಳೆ ರಾಜೇಶ್ ಮೇಲಕ್ಕೆ ಬರುವ ಸಂದರ್ಭ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ರಕ್ಷಿಸಲು ಮುಂದಾದ ಪವನ್ ಹಾಗೂ ಗೋಪಾಲ್ ನಾಯ್ಕ ಕೂಡ ಬಾವಿಯೊಳಗೆ ಸಿಲುಕಿಕೊಂಡಿದ್ದರು.
ಘಟನೆಯ ಮಾಹಿತಿ ತಕ್ಷಣವೇ ಕಾರ್ಕಳ ಅಗ್ನಿಶಾಮಕ ದಳಕ್ಕೆ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿದರು. ಅಪಾರ ಎಚ್ಚರಿಕೆ ಹಾಗೂ ಸಾಹಸ ಪ್ರದರ್ಶಿಸಿದ ಅಗ್ನಿಶಾಮಕ ಸಿಬ್ಬಂದಿ, ಬಾವಿಯೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು.
ಗಾಯಗೊಂಡಿದ್ದ ರಾಜೇಶ್ ಅವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಅಗ್ನಿಶಾಮಕ ದಳದ ಈ ತ್ವರಿತ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.